ಮಳಲಿ ಮಸೀದಿ ತೀರ್ಪು: ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ವಕ್ಫ್ ಸಮಿತಿ ನಿರ್ಧಾರ
ಮಂಗಳೂರು: ಮಳಲಿ ಮಸೀದಿ ವಿವಾದ ಪ್ರಕರಣದ ತೀರ್ಪಿನ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಸಲಹಾ ಸಮಿತಿ ನಿರ್ಧರಿಸಿದೆ.
ತೀರ್ಪು ಪ್ರಕಟವಾದ ನಂತರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಮಾತನಾಡಿ, ವಕ್ಫ್ ಕಾಯ್ದೆಯ ಅನ್ವಯ ಇಂತಹ ವಿಚಾರವನ್ನು ಸಿವಿಲ್, ಕಂದಾಯ ಕೋರ್ಟ್, ಇತರ ಪ್ರಾಧಿಕಾರದಲ್ಲಿ ವಿಚಾರಣೆ ನಡೆಸುವಂತಿಲ್ಲ. ಆದರೆ ಮಳಲಿ ಮಸೀದಿ ವಿಚಾರದಲ್ಲಿ ಸ್ಥಳೀಯರು ಮಂಗಳೂರಿನ ಸಿವಿಲ್ ನ್ಯಾಯಾಲಯಕ್ಕೆ ಹೋದಾಗ ಮಸೀದಿಯ ಪರ ವಕೀಲರು ಇದನ್ನು ಪ್ರಶ್ನಿಸಿ ಮಧ್ಯಂತರ ದಾವೆ ಹೂಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ವಕ್ಫ್ ಆಸ್ತಿಗೆ ಸಂಬಂಧಪಟ್ಟಂತೆ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬಹುದು ಎಂದು ಆದೇಶ ನೀಡಿದೆ. ಈ ಹಿನ್ನಲೆಯಲ್ಲಿ ಇದರ ವಿರುದ್ಧ ಕಾನೂನು ತಜ್ಞರ ಸಲಹೆಯನ್ನು ಪಡೆದುಕೊಂಡು, ರಾಜ್ಯ ವಕ್ಫ್ ಬೋರ್ಡ್ ಜೊತೆಗಿನ ಸಮಾಲೋಚನೆಯ ಬಳಿಕ ಇಂದಿನ ತೀರ್ಪಿನ ವಿರುದ್ಧ ಹೈಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
500 ವರ್ಷದ ಇತಿಹಾಸವಿರುವ ಮಳಲಿ ಮಸೀದಿಯು 2003ರಲ್ಲಿ ವಕ್ಫ್ ಬೋರ್ಡ್ ನಲ್ಲಿ ನೋಂದಾವಣಿಯಾಗಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ತೀರ್ಪಿನ ವಿರುದ್ದ ಕಾನೂನು ಹೋರಾಟ ನಡೆಸಲಿದ್ದೇವೆ. ನಮಗೆ ನ್ಯಾಯ ಸಿಗುವ ನಂಬಿಕೆಯಿದೆ ಎಂದು ಬಿ.ಎ ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ವಕ್ಫ್ ಅಧಿಕಾರಿ ಮೌಝಮ್ ಪಾಷಾ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮತ್ತಿತ್ತರರು ಉಪಸ್ಥಿತರಿದ್ದರು.